Wednesday, December 9, 2009

ಮೊದಲ ಹವ್ಯಕ ಯಕ್ಷಗಾನ "ದಕ್ಷಾಧ್ವರ "...




ಕರಾವಳಿ ಕರ್ನಾಟಕ ಹಾಗೂ ಕಾಸರಗೋಡು , ಗಡಿನಾಡು ಪ್ರದೇಶಗಲ್ಲಿ ಹೆಚ್ಚಾಗಿಕಂಡುಬರುವ ಬ್ರಾಹ್ಮಣ ಪಂಗಡಗಳಲ್ಲಿ ಹವ್ಯಕರು ಪ್ರಮುಖರು ಪಂಚಾಯತನ ಪೂಜೆಯ ಮೂಲಕ ಪ್ರಕೃತಿಯ ಆರಾಧನೆ, ಹೋಮ ಹವನಾದಿಗಳಲ್ಲಿ ಹವಿಸ್ಸನ್ನು ಅರ್ಪಿಸುವಮೂಲಕ ದೇವತಾ ಸಂತೃಪ್ತಿಯನ್ನು ನಡೆಸುವುದರಿಂದ "ಹವ್ಯಕ"ರೆಂಬ ಹೆಸರು ಪಡೆದವರು ಎಂಬುದು ಹಿರಿಯರಿಂದ ತಿಳಿದುಬರುತ್ತದೆ.ಹವ್ಯಕರ ಆಡುಭಾಷೆಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ,ಕಾಸರಗೋಡು ಪ್ರದೇಶಗಳಲ್ಲಿ ತುಸು ಭಿನ್ನವಾಗಿದೆ.

ಯಕ್ಷಗಾನ ಕ್ಷೇತ್ರಕ್ಕೆ ಹವ್ಯಕ ಸಮುದಾಯದವರ ಕೊಡುಗೆ ಅಪಾರ. ಹಲವಾರು ಶ್ರೇಷ್ಠಕಲಾವಿದರು ಯಕ್ಷಗಾನ ಕಲೆಯನ್ನು ತಮ್ಮ ಪ್ರತಿಭೆಯಿಂದ ಬೆಳಗಿದ್ದಾರೆ. ಯಕ್ಷಗಾನ ಪ್ರಸಂಗ ಸಾಹಿತ್ಯವನ್ನು ಅವಲೋಕಿಸಿದರೆ ಎಲ್ಲ ಕಲಾವಿದರೂ ಕನ್ನಡ ಭಾಷೆ ಯಾ ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚಿ ಭಾಷಾ ಮಾಧ್ಯಮದ ಮೂಲಕ ತಮ್ಮ ಪ್ರತಿಭಾ ಜ್ಯೋತಿಯನ್ನು ಬೆಳಗಿದ್ದಾರೆ.

ಹವ್ಯಕರಿಗೆ ತಮ್ಮದೇ ಭಾಷೆಯಲ್ಲಿ ಯಕ್ಷಗಾನ ಪ್ರಸಂಗ ಸಾಹಿತ್ಯವು ಲಭ್ಯವಿಲ್ಲದ ವಿಚಾರವನ್ನು ಮನಗಂಡ ಕೀರಿಕ್ಕಾಡು ಮಾಸ್ಟರ್ ವಿಷ್ಣು ಭಟ್ಟರ ಮಗ ಶ್ರೀ ವಿಶ್ವ ವಿನೋದ ಬನಾರಿಯವರು ಪ್ರಪ್ರಥಮವಾಗಿ ಹವ್ಯಕ ಆಡು ಭಾಷೆಯಲ್ಲಿ ರಚಿಸಿದ ಪ್ರಸಂಗವೇ ದಕ್ಷಾಧ್ವರ. ಈ ಪ್ರಸಂಗದ ಬಳಿಕ ಅಂಬೇಮೂಲೆ ಗೋವಿಂದ ಭಟ್ಟರು ಕೆಲವಾರು ಹವ್ಯಕ ಪ್ರಸಂಗಗಳನ್ನು ರಚಿಸಿದ್ದಾರೆ.

ಶ್ರೀ ವಿಶ್ವವಿನೋದ ಬನಾರಿಯವರು ಕನ್ನಡ ಭಾಷೆಯಲ್ಲಿರುವ ಬಲು ಪ್ರಸಿದ್ಧ"ಗಿರಿಜಾ ಕಲ್ಯಾಣ" ಪ್ರಸಂಗದ ಮೊದಲ ಸಂಧಿಯನ್ನು " ದಕ್ಷಾಧ್ವರ" ಹವ್ಯಕ ಆಡು ಭಾಷೆಯಲ್ಲಿ ಬರೆದಿದ್ದು ಬಹುತೇಕ ಕನ್ನಡದಲ್ಲಿರುವ ಪದ್ಯಗಳ ತೆರನಂತೆ ಹವ್ಯಕ ಭಾಷೆಯಲ್ಲೂ ಉಳಿಸಿಕೊಂಡು ಪ್ರಸಂಗದ ಒಟ್ಟಂದವನ್ನು ಕಾಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಧ್ವ ಸಿದ್ದಾಂತ ಗ್ರಂಥಾಲಯ ಉಡುಪಿಯವರು ಪ್ರಕಟಿಸಿದ ಗಿರಿಜಾ ಕಲ್ಯಾಣ ಪ್ರಸಂಗದಲ್ಲಿ ಬರುವ ದಕ್ಷನು ಸತ್ರ ಯಾಗಕ್ಕಾಗಿ ಬರುವಾಗ ದೇವತೆಗಳೆಲ್ಲ ಎದ್ದು ವಂದಿಸಿದರೂ ಈಶ್ವರನು ಸುಮ್ಮನಿರುವುದನ್ನು ಕಂಡು ಕೆರಳಿ ಈಶ್ವರನನ್ನು ಜರೆಯುವಾಗ ಇರುವ ಬಲು ಪ್ರಸಿದ್ದ ಪದ್ಯ " ಸರಸಿಜಾಸನನೆಂದ ನುಡಿಗೆ ನಾ ಮರುಳಾಗಿ| ಕನ್ನೆಯನಿತ್ತೆ ನಿರರ್ಥ | ಪರಕಿಸಲು ಕೋಡಗನ ಕೈಯ್ಯ ಮಾಲೆಯ ಕೊಟ್ಟ ತೆರನಾದುದಕಟೆನ್ನ ಬದುಕು || .... " ಎಂಬ ಪದವು ಕುಂಬಳೆ ಸೀಮೆ ಹವ್ಯಕ ಭಾಷೆಯಲ್ಲಿ " ಸರಸಿಜಾಸನ ಹೇದ ಮಾತಿಂಗೆ ಮರುಳಾಗಿ | ಅರಡ್ಯದ್ದೆ ಮಗಳಾನು ಕೊಟ್ಟು | ಪರಿಮಳದ ಮಲ್ಲಿಗೆಯ ಮಾಲೆಯಾ ಮಂಗನ ಕೊರಳಿಂಗೆ ಹಾಕಿದಾಂಗಾತು ...." (ಸಾಮಾನ್ಯವಾಗಿ ಈ ಪದವನ್ನು ಹೆಣ್ಣು ಮಗಳನ್ನು ಕೊಟ್ಟ ಮಾವ, ತಮ್ಮ ಅಳಿಯನ ಕುರಿತಾಗಿ ದನಗಳಿಗೆ ಅಕ್ಕಚ್ಚು ಕೊಡುವಾಗ ತಲೆ ಬಿಸಿಯಾಗಿ ಹಾಡುವುದನ್ನು ಕೆಲವೆಡೆ ನಾನು ಕಂಡಿದ್ದೇನೆ!)

ಹಾಗೆಯೇ ಈಶ್ವರನು ದಾಕ್ಷಾಯಿಣಿಗೆ ದಕ್ಷನೇಕೆ ತನ್ನನು ಆಹ್ವಾನಿಸಿಲ್ಲ ಎಂಬುದನ್ನು ವಿವರಿಸುವ " ಒಂದು ದಿವಸ ನಾನು ಕುಳಿತಿರ್ಪ ಸಭೆಗೆ | ಬಂದನು ದಕ್ಷ ನಾನೇಳದ ಬಗೆಗೆ |......." ಪದ್ಯವೂ ಹವ್ಯಕದಲ್ಲಿ " ಒಂದು ದಿನ ಆನು ಕೂದೊಂಡಿದ್ದ ಸಭೆಗೆ | ಬಂದ ದಕ್ಷ ಆನೇಳದ್ದ ಬಗೆಗೆ ...." ಮಧ್ಯಮಾವತಿ ಏಕತಾಳದಲ್ಲಿ ಮೂಲ ಕನ್ನಡದಂತೆಯೇ ಸೊಗಸಾಗಿ ಬರೆದಿದ್ದು ಪಕ್ಕನೆ ಪಾತ್ರಧಾರಿಗೆ ಪ್ರಸಂಗ ನಡೆ ತಪ್ಪದಂತೆ ಅನುಕೂಲವೇ ಆಗಿದೆ.

ಈ ಪ್ರಸಂಗದ ಬಿಡುಗಡೆ ಹಾಗೂ ಮೊದಲ ಪ್ರದರ್ಶನ ನೀರ್ಚಾಲಿನಲ್ಲಿ ನಡೆದ ಅಖಿಲ ಭಾರತ ಹವ್ಯಕ ಸಮ್ಮೇಳನದಲ್ಲಿ ನಡೆದಿತ್ತು. ಶೇಣಿ ಅಜ್ಜನ ಮುನ್ನುಡಿ ಹೊಂದಿರುವ ಈ ಕೃತಿ ಹವ್ಯಕರ ಹೆಮ್ಮೆ ಎಂದರೂ ತಪ್ಪಾಗಲಾರದು .ಹವ್ಯಕ ಕನ್ನಡದ ಭಾಷೆಯ ಸೊಗಡನ್ನು ಸವಿಯಲು ಈ ಪ್ರಸಂಗದ ಧ್ವನಿ ಮುದ್ರಿಕೆಯು ಪದ್ಯಾಣ ಗಣಪತಿ ಭಟ್ಟರ ಕಂಠ ಸಿರಿಯಲ್ಲಿ ಶೇಣಿ ಅಜ್ಜನ ನಿರ್ದೇಶನದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಆಸಕ್ತರು ಈ ಪ್ರಸಂಗದ ಎಲ್ಲ ಪುಟಗಳಿಗಾಗಿ ಲೇಖಕರನ್ನು ಸಂಪರ್ಕಿಸಬಹುದು. .

***

2 comments:

chirantana said...

ಸರಸಿಜಾಸನನೆಂದ ನುಡಿಗೆ ನಾ ಮರುಳಾಗಿ| ಕನ್ನೆಯನಿತ್ತೆ ನಿರರ್ಥ | ಪರಕಿಸಲು ಕೋಡಗನ ಕೈಯ್ಯ ಮಾಲೆಯ ಕೊಟ್ಟ ತೆರನಾದುದಕಟೆನ್ನ ಬದುಕು ||
bahala artapoorna saalugalu... yavude maavandiru sota mele yochisuva samanya vishayve :)

Unknown said...

Preethiya Subrahmanya bhatringe namaskara... Anu Ishwarachandra heli... raja yakshaganada asakthi eppava... Enage dayamadi Havyaka Dakshadhwara athava ethra Prasanganga Havyaka bhashege tharjame madiddu book enadru (prasanga pusthaka+ cd) elli sikkuthu heli dayamadi thilisi. mathe sheni ajja artha helida sumar varsha modale dakshadhwrada cassette ondu release agithidu... adra cd enadru madiddava? Mahiti eddare thilisi..
From,
Ishwarachandra
ishabg@gmail.com