Sunday, October 31, 2010

ಬಲಿಪರಿಗೆ ರಾಜ್ಯೋತ್ಸವ ಪ್ರಶಸ್ತಿ

ಯಕ್ಷಗಾನ ಭಾಗವತ ಭೀಷ್ಮರೆನಿಸಿದ ಹಿರಿಯ ಕಲಾವಿದ ಬಲಿಪ ನಾರಾಯಣ ಭಾಗವತರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲುತ್ತಿರುವುದು ನಮಗೆಲ್ಲ ಸಂತೋಷದ ವಿಚಾರ . ತೆಂಕುತಿಟ್ಟಿನ ಭಾಗವತಿಕೆಯ ಸರ್ವಾಂಗೀಣ ಅಧ್ಯಯನ ಸಂಪನ್ನತೆಯುಳ್ಳ ಬಲಿಪರಿಗೆ ಈ ರಾಜ್ಯೋತ್ಸವ ಪ್ರಶಸ್ತಿ ಸಲ್ಲುತ್ತಿರುವುದು ತೆಂಕುತಿಟ್ಟಿನ ಅಭಿಮಾನಿಗಳೆಲ್ಲರಿಗೆ ಹೆಮ್ಮೆಯ ವಿಷಯ . ಬಲಿಪರ ಜೀವಮಾನದ ಸಾಧನೆಗೆ ಸಂದ ಗೌರವ ಇದು . ಬಹಳ ಹಿಂದೆಯೇ ಈ ಪ್ರಶಸ್ತಿ ಅವರಿಗೆ ಸಲ್ಲಬೇಕಿತ್ತು ಈಗಲಾದರೂ ಸರಕಾರ ರಾಜ್ಯೋತ್ಸವ ಪ್ರಶಸ್ತಿ ಕೊಡುತ್ತಿರುವುದು ತೃಪ್ತಿಯ ವಿಷಯ .


ಬಲಿಪರು ಇದರಿಂದ ಸ್ಫೂರ್ತಿ ಪಡೆದು ಇನ್ನು ಹೆಚ್ಚು ವರ್ಷ ನಮ್ಮೆಲರನ್ನು ತಮ್ಮ ಭಾಗವತಿಕೆಯ ಮೂಲಕ ರಂಜಿಸಲಿ ಎಂದು ಮನ:ಪೂರ್ವಕ ಹಾರೈಸುತ್ತೇನೆ.

Wednesday, October 13, 2010

ಬಯಲಾಟ ಮತ್ತು ಕಾಲಮಿತಿ ಯಕ್ಷಗಾನ ಪ್ರದರ್ಶನಗಳು


ಕರಾವಳಿಯಲ್ಲಿ ಬಯಲಾಟವೆಂದರೆ ರಾತ್ರಿಯಿಡೀ ಎಂಟರಿಂದ ಹತ್ತು ಗಂಟೆಗಳ ಪೂರ್ಣಪ್ರಮಾಣದ ಯಕ್ಷಗಾನ ಪ್ರದರ್ಶನ. ಕೋಡ೦ಗಿಯಿಂದ ತೊಡಗಿ ಬಾಲಗೋಪಾಲರೆ ಮೊದಲಾದ ಪೂರ್ವರಂಗ ಮುಗಿದು ಕೇಳಿ ಬಡಿದು ಪ್ರಸಂಗ ಆರಂಭವಾಗಿ ಬೆಳಗಿಯ ಜಾವ ಮಂಗಳ ಆಗುವವರೆಗೆ ಸುದೀರ್ಘ ಪ್ರದರ್ಶನ . ಚಿಕ್ಕವರಿದ್ದಾಗ ಆಟಕ್ಕೆ ಹೋಗುವುದೆಂದರೆ ಸಂಭ್ರಮ ! ಶಾಲಾ ಆಟದ ಮೈದಾನಿನಲ್ಲಿ ನಡೆಯುತ್ತಿದ್ದ ರಾತ್ರಿಯಿಡೀ ಪ್ರದರ್ಶನಕ್ಕೆ ಕಿಕ್ಕಿರಿದ ಜನ ಸಂದಣಿ ಇರುತ್ತಿತ್ತು. ದೂರದರ್ಶನದ೦ಥ ದೃಶ್ಯ ಮಾದ್ಯಮಗಳು ಇನ್ನು ಜನಸಾಮಾನ್ಯರ ಮನೆಗೆ ಲಗ್ಗೆ ಇಡದೆ ಇದ್ದ ಸಮಯವದು. ಬಹುತೇಕ ಜನ ಸಾಮಾನ್ಯರಿಗೆ ಇದ್ದ ಏಕೈಕ ಮನೋರಂಜನಾ ಸಾಧನ ಯಕ್ಷಗಾನ ಪ್ರದರ್ಶನ.

ದೂರದರ್ಶನವು ಜನ ಸಾಮಾನ್ಯರ ಜೀವನದ ಅವಿಭಾಜ್ಯ ಅಂಗವಾಗಿ ಸ್ಥಾಪಿತವಾದ ಮೇಲೆ ದೃಶ್ಯ ಮಾಧ್ಯಮಗಳ ಬೆಳವಣಿಗೆ  ಹಾಗೂ ಚಲನ ಚಿತ್ರಗಳ ಭಾರಾಟೆ ಯಕ್ಷಗಾನ ಪ್ರದರ್ಶನಕ್ಕೆ ತೀವ್ರ ಹೊಡೆತ ನೀಡಿದ್ದಂತೂ ನಿಜ . ಜಾಗತೀಕರಣದ ಪರಿಣಾಮ ಹಾಗೂ ಯುವ ಜನತೆಯ ಪಾಶ್ಚಾತ್ಯ ಸಂಸ್ಕೃತಿಯ ಮೋಹ  ನಮ್ಮ ಈ ಮಣ್ಣಿನ ಕಲೆಯ ಬಗ್ಗೆ ಅಸಡ್ಡೆಯೂ ಸೇರಿ ನಿಧಾನಕ್ಕೆ ಯಕ್ಷಗಾನವೂ ಕಾಲಗರ್ಭದಲ್ಲಿ ಅಡಗಿ ಹೋಗುವ ಅಪಾಯದ ಅಂಚಿಗೆ ಸರಿಯುತ್ತಿದೆ.

   ಇಡೀ ರಾತ್ರಿ ಪ್ರದರ್ಶನ ಇತ್ತೀಚಿಗೆ ಕಳೆಗುಂದಿ ತಡರಾತ್ರಿಯ ಬಳಿಕ ಆಸನಗಳು ಬರಿದಾಗಿ ಬೆಳಗಿನ ಜಾವಕ್ಕೆ ಮೇಳದ ಕಲಾವಿದರು, ಆಟ ಆಡಿಸುವ ಸೇವಾಕರ್ತರು , ಧ್ವನಿವರ್ಧಕ ಮತ್ತು ಬೆಳಕಿನ ವ್ಯವಸ್ಥೆಯವರನ್ನು ಹೊರತುಪಡಿಸಿ ಬೆರಳೆಣಿಕೆಯ ಪ್ರೇಕ್ಷಕರು  ಮಾತ್ರ ಉಳಿಯುತ್ತಿದ್ದು ಕಲಾವಿದರಿಗೆ ನಿರುತ್ಸಾಹ ಉಂಟಾಗುತ್ತಿದೆ.

ಇದಕ್ಕೊಂದು ಪರಿಹಾರ ಯತ್ನವಾಗಿ ಕಾಲಮಿತಿಯ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದು ಇಡೀ ರಾತ್ರೆಯ ಆಟದ ಸೊಗಸಿಲ್ಲದಿದ್ದರೂ ತಕ್ಷಣ ಸವಿಯಲು ಸಿಗುವ ಆಹಾರ ಪದಾರ್ಥದಂತೆ ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಸಫಲವಾಗಿದೆ. ಮೂರು ನಾಲ್ಕು ತಾಸುಗಳ ಈ ಪ್ರದರ್ಶನದಲ್ಲಿ ಪೂರ್ವರಂಗವನ್ನು ಬಿಟ್ಟು ನೇರ ಕಥಾ ನಿರೂಪಣೆಗೆ ತೊಡಗುತ್ತಿದ್ದು  ಜನರಿಗೆ ಚುಟುಕಾಗಿ ಕಥೆಯನ್ನು ಅಭಿವ್ಯಕ್ತಿಗೊಳಿಸಲಾಗುತ್ತಿದೆ. ಕಾಲಮಿತಿಯ ಯಕ್ಷಗಾನದಲ್ಲಿ ಕಲಾವಿದನಿಗೆ ಸಾಕಷ್ಟು ವಿಶ್ರಾಂತಿ ದೊರೆಯುತ್ತದೆ. ಅನಾವಶ್ಯಕವಾಗಿ ನಿದ್ದೆಗೆಟ್ಟು ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗಬೇಕಿಲ್ಲವಾದರೂ ತನ್ನ ಪಾತ್ರದ ಅಭಿವ್ಯಕ್ತಿಗೆ ಕಾಲಾವಕಾಶ ಮಾತ್ರ ಕಡಿಮೆಯೇ ಸಿಗುತ್ತಿದ್ದು ಕಲಾವಿದನ ವೃತ್ತಿ ಜೀವನಕ್ಕೆ ಅದೊಂದು ಸವಾಲಾಗಿದೆ.


ಈ ಮಧ್ಯೆ ನಿರಂತರ ೨೪ ತಾಸುಗಳ ಯಕ್ಷಗಾನ ಪ್ರಯೋಗ , ಸಂಜೆ ಆರಂಭವಾಗಿ ಮರುದಿನ ಮಧ್ಯಾಹ್ನದ   ತನಕ ಪ್ರದರ್ಶನ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದು ಈಗಲೂ ಅಷ್ಟು ಹೊತ್ತು ಪ್ರದರ್ಶನ ನೀಡುವ ಕಲಾವಿದರ ಸಾಮರ್ಥ್ಯವನ್ನು ತೋರಿಸುತ್ತಿದೆ.

ಇನ್ನು  ಬಯಲಾಟಗಳ ಗುಣಮಟ್ಟದಲ್ಲೂ  ಬಹಳ ಬದಲಾವಣೆಗಳಾಗಿವೆ. ಹಿಂದೆ ಹರಕೆಯ ಆಟವಾದರೂ ಕಲಾವಿದರು ತಮ್ಮ ಪಾತ್ರದ ಗುಣಮಟ್ಟವನ್ನು ಕಾಯ್ದುಕೊಂಡು ಬರುತ್ತಿದ್ದರು. ಈಗಿನ ವಾತಾವರಣವನ್ನು ಗಮನಿಸಿದಾಗ ಅದರಲ್ಲೂ ಬದಲಾವಣೆಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ .ಇದರೊಂದಿಗೆ ಸಾಮಾನ್ಯವಾಗಿ ಬಯಲಾಟ ಆಡಿಸುವವರು ಆಟದ ರಂಗೇರಿಸಲು ಬ್ಯಾಂಡ್ , ವಾದ್ಯ , ಕೊಂಬು ಕಹಳೆ ಇತ್ಯಾದಿ ಹೆಚ್ಚುವರಿ "ಹೊರೆ" ಯನ್ನು ದೇವರ ಪ್ರೀತ್ಯರ್ಥವಾಗಿ ? ತನ್ನ  ಪ್ರತಿಷ್ಠೆಯನ್ನು ಮೆರೆಸಲು ಬಳಸುವುದನ್ನು ಎಲ್ಲರೂ ನೋಡಿ ಅನುಭವಿಸಿರುವ ವಿಷಯವೇ ! ಇಲ್ಲಿ ಯಾವುದೊಂದು ಯಕ್ಷಗಾನದ ಆವರಣಕ್ಕೆ ಪೂರಕವಾಗಿರದೆ ಆಟದ ಕಳೆಯನ್ನೇ ಹಾಳುಗೆಡಹುತ್ತದೆ ಎಂದು ಎಷ್ಟು ಬಾರಿ ತಿಳಿ ಹೇಳಿದರೂ ನಮ್ಮೂರ ಜನಕ್ಕೆ "ಬ್ಯಾಂಡ್  ಇಜ್ಜಿಂಡ ಎಂಚ ?" ಅಂತ ಮುಖ ಸಿ೦ಡರಿಸುವುದು ಅಭ್ಯಾಸ !.  ಆಟದಲ್ಲಿ ದೇವಿ ಪ್ರತ್ಯಕ್ಷವಾಗುವಾಗ "ಕರಿಯ ಐ   ಲವ್ ಯೂ " ಹಾಡನ್ನು ರಸವತ್ತಾಗಿ ಬ್ಯಾಂಡ್ ಸೆಟ್ ನವರು ನುಡಿಸಿದ್ದನ್ನು ನೋಡಬೇಕಾದ ದುರ್ಧೈವೂ  ಈಗಿನ ಪ್ರೇಕ್ಷಕರಿಗಿದೆ !

ಹರಕೆ ಮೇಳಗಳು ಇಂದಿಗೂ ಪೂರ್ಣ ರಾತ್ರಿಯ ಪ್ರದರ್ಶನವನ್ನು ನೀಡುತ್ತಿದೆ. ಆದರೆ ಜನರನ್ನು ಸೆಳೆಯುವಲ್ಲಿ ಅದು ನಿಧಾನವಾಗಿ ವಿಫಲವಾಗುತ್ತಿರುವುದು ಒಂದು ದುರಂತವೇ ಸರಿ. ಹೀಗಾಗಿ ಕಲಾವಿದರ ಹಿತದೃಷ್ಟಿಯಿಂದ ಹರಕೆಯ ಆಟಗಳನ್ನು ಕಾಲಮಿತಿಯ ಪರಿಮಿತಿಗೆ ಒಳಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗಿದೆ.

ಫೋಟೋ ಕೃಪೆ : ಶ್ರೀ.ಸಂತೋಷ್ ಪೈ.

Tuesday, July 27, 2010

ಮನ ಮುಟ್ಟುವ ಶ್ಲೋಕ ...

ಹರಿ ಹರರಲ್ಲಿ ಬೇಧವಿಲ್ಲ ಎಂದು ಸಾರಲು ಕವಿಯೊಬ್ಬ ಹರಿಹರರನ್ನು ಒಟ್ಟಾಗಿ ಒಂದೇ ಶ್ಲೋಕದಲ್ಲಿ ಪ್ರಾರ್ಥಿಸಿದ್ದು ಹೀಗೆ..
ಪಾಯಾತ್ ಕುಮಾರಜನಕ: ಶಶಿಖಂಡಮೌಳಿ:
ಶಂಖಪ್ರಭಶ್ಚ  ನಿಧನಶ್ಚ ಗವೀಶಯಾನ:
ಗಂಗಾಂಚ ಪನ್ನಗಧರಶ್ಚ ಉಮಾವಿಲಾಸ:
ಆದ್ಯಕ್ಷರ ರಹಿತೋ ಸಹಿತೋಪಿ ದೇವ:

ಇದರಲ್ಲಿ ಮೊದಲ ಅಕ್ಷರ ಸೇರಿಸಿದರೆ ಶಿವನ ಸ್ತುತಿಯಾಗುತ್ತದೆ. ಮೊದಲ ಅಕ್ಷರ ಬಿಟ್ಟರೆ ವಿಷ್ಣುವಿನ ಸ್ತುತಿಯಾಗುತ್ತದೆ. ಮೊದಲ ಅಕ್ಷರವಿದ್ದರೂ ಇಲ್ಲದಿದ್ದರೂ ದೇವರನ್ನೇ ಸ್ತುತಿಸಿದಂತಾಗುತ್ತದೆ.

ಕುಮಾರಜನಕ:= ಕುಮಾರನ ತಂದೆ =ಶಿವ ; ಮಾರ ಜನಕ:= ಮನ್ಮಥನ ತಂದೆ =ವಿಷ್ಣು, ಶಶಿಖಂಡಮೌಳಿ:= ಚಂದ್ರಶೇಖರ , ಶಿಖಂಡಮೌಳಿ:=ನವಿಲುಗರಿಯನ್ನು ಧರಿಸಿದಾತ= ವಿಷ್ಣು/ಕೃಷ್ಣ , ಶಂಖಪ್ರಭ = ಬಿಳಿಬಣ್ಣದವ (ಶಿವ ) , ಖಪ್ರಭ=ಆಕಾಶ ಬಣ್ಣದವ =ವಿಷ್ಣು, ನಿಧನ=ಶಿವ, ಧನ=ವಿಷ್ಣು, ಗವೀಶಯಾನ: = ನಂದಿವಾಹನ , ವೀಶಯಾನ:=ಪಕ್ಷಿವಾಹನ , ಗಂಗಾಂಚ = ಗಂಗಾಧರ , ಗಾಂಚ =ಗೋಪಾಲ ಪನ್ನಗಧರ =ನಾಗಭೂಷಣ,ನಗಧರ = ವಿಷ್ಣು, ಉಮಾವಿಲಾಸ:= ಶಿವ , ಮಾವಿಲಾಸ: =ವಿಷ್ಣು
ಹಾಗಾಗಿ ಮೊದಲ ಅಕ್ಷರ ಸೇರಿಸಿದರೂ ಬಿಟ್ಟರೂ ದೇವರನ್ನು ನೆನೆದಂತೆಯೇ ಆಗುವುದು .

ಅರ್ಥಪೂರ್ಣವಾದ ಈ ಶ್ಲೋಕ ಎಷ್ಟು ಸೊಗಸಾಗಿದೆಯಲ್ಲವೇ ?

Wednesday, July 14, 2010

ಕೆಲವು ಅಪೂರ್ವ ಛಾಯಾಚಿತ್ರಗಳು ...

ಯಕ್ಷಗಾನ ಕ್ಷೇತ್ರದಲ್ಲಿ ಅದೆಷ್ಟೋ ಮಂದಿ ಕಲಾವಿದರು ಪ್ರಸಿದ್ಧಿಯನ್ನು ಪಡೆದು ರಂಗವನ್ನು ಬೆಳಗಿದವರಿದ್ದಾರೆ . ಕಲೆಯನ್ನು ತಮ್ಮದೇ ಆದ ಛಾಪಿನಿಂದ ಶ್ರೀಮಂತಗೊಳಿಸಿ ತೆರೆಗೆ ಸರಿದವರು ಹಾಗೂ ಅವರೊಂದಿಗೆ ಪರಿಶ್ರಮಿಸಿ ಈಗ ಹಿರಿಯರೆನಿಸಿಕೊಂಡ ಚೇತನಗಳ ಕೆಲವು ಅಪೂರ್ವ ಛಾಯಾಚಿತ್ರ ಯಕ್ಷ ರಸಿಕರಿಗಾಗಿ ಇಲ್ಲಿ ನೀಡುತ್ತಿದ್ದೇನೆ
ಮೊದಲ ಚಿತ್ರದಲ್ಲಿ ಎಪ್ಪತ್ತರ ತಲೆಮಾರಿನ "ಯಕ್ಷ ದಿಗ್ಗಜರು ಮತ್ತು ಯಕ್ಷ ಪೋಷಕರು "
ಕುಳಿತವರು (ಎಡದಿಂದ ಬಲಕ್ಕೆ ) ಶ್ರೀ ನಿಡ್ಲೆ ನರಸಿಂಹ ಭಟ್ , ಶ್ರೀ. ಬೋಳಾರ ನಾರಾಯಣ ಶೆಟ್ಟಿ ,ಶ್ರೀ ವಿಟ್ಲ ಗೋಪಾಲಕೃಷ್ಣ ಜೋಶಿ , ಶ್ರೀ.ಎಂ.ನಾರಾಯಣ ಭಟ್ (ಅಳಿಕೆ) ಶ್ರೀ ಬಲಿಪ ನಾರಾಯಣ ಭಾಗವತ , ಶ್ರೀ ಅಳಿಕೆ ರಾಮಯ್ಯ ರೈ ,ಶ್ರೀ ಕದ್ರಿ ವಿಷ್ಣು
ಮೊದಲ ಸಾಲಿನಲ್ಲಿ ನಿಂತವರು : ಶ್ರೀ ಎಂ.ವಾಸುದೇವ ಪ್ರಭು , ಶ್ರೀ.ಕೆ.ಸಂಜೀವ ಶೆಟ್ಟಿ , ಶ್ರೀ ಗೋಪಾಲಕೃಷ್ಣ ಕುರುಪ್ , ಶ್ರೀ ಬಣ್ಣದ ಕುಟ್ಯಪ್ಪು, ಶ್ರೀ ಕೋಳ್ಯುರ್ ರಾಮಚಂದ್ರ ರಾವ್ , ಶ್ರೀ ಕೆ.ವಿ. ಸುಬ್ಬಾ ರಾವ್ , ಶ್ರೀ ಅಡ್ಕಸ್ಥಳ ನಾರಾಯಣ ಶೆಟ್ಟಿ
ನಿಂತವರಲ್ಲಿ ಕೊನೆಯ ಸಾಲು : ಶ್ರೀ ಡೊಂಬ, ಶ್ರೀ ಯು. ಗಂಗಾಧರ ಭಟ್ , ಶ್ರೀ.ಕೇದಗಡಿ ಗುಡ್ಡಪ್ಪ ಗೌಡ , ಶ್ರೀ ಪಡ್ರೆ ಕುಮಾರ ಮತ್ತು ಶ್ರೀ ಪಡ್ರೆ ಚಂದು



ಎರಡನೇ ಚಿತ್ರದಲ್ಲಿ
ಶ್ರೀ ಪೆರ್ವೋಡಿ ನಾರಾಯಣ ಭಟ್ , ಶ್ರೀ ದೇಜು ಹಾಗೂ ಶ್ರೀ ಬಲಿಪ ನಾರಾಯಣ ಭಾಗವತ .
ಮೊತ್ತ ಮೊದಲ ಬಾರಿಗೆ ಶ್ರೀ ಬಲಿಪರನ್ನು ಮುಂಬೈಗೆ ಶ್ರೀ ದೇಜುರವರು ಕರೆದುಕೊಂಡು ಹೋದಾಗ ತೆಗೆದ ಛಾಯಾ ಚಿತ್ರವಿದು .



ಕೊನೆಯ ಚಿತ್ರದಲ್ಲಿ ಶ್ರೀ ಬಲಿಪರ ಭಾಗವತಿಕೆಯಲ್ಲಿ ಶ್ರೀ ಅಳಿಕೆ ರಾಮಯ್ಯ ರೈಗಳ ಪೀಠಿಕೆ ವೇಷ

ಹಳೆಯ ಕಪ್ಪು ಬಿಳುಪು ಚಿತ್ರಗಳನ್ನು ನೋಡುವಾಗ ಮನಸ್ಸಿಗೆ ಮುದವಾಗುತ್ತದಲ್ಲವೇ ?

Thursday, July 8, 2010

ಯಕ್ಷಗಾನ ಸಂಗೀತ ವೈಭವ ಕಾರ್ಯಕ್ರಮ



ಕರಾವಳಿ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಜನಾಕರ್ಷಣೆ ಪಡೆದುಕೊಳ್ಳುತ್ತಿರುವ ಒಂದು ಕಾರ್ಯಕ್ರಮವೆಂದರೆ ಯಕ್ಷಗಾನ ಸಂಗೀತ ವೈಭವ . ಇಬ್ಬರು , ಮೂವರು ಯಾ ಹಲವು ಜನ ಭಾಗವತರು ಸೇರಿ ವಿವಿಧ ಪ್ರಸಂಗಗಳಿಂದ ಆಯ್ದ ಪದ್ಯಗಳನ್ನು ಹಾಡಿ ರಸವತ್ತಾಗಿ ನಡೆಸಿಕೊಡುವ ಒಂದು ಕಾರ್ಯಕ್ರಮ . ಇದರಲ್ಲಿ ಏಕತಾನತೆ ಕಳೆಯಲೋ ಎಂಬಂತೆ ಒಬ್ಬ ನಿರೂಪಕ ತನ್ನ ಹಾಸ್ಯ ಮಿಶ್ರಿತ ಮಾತುಗಳಲ್ಲಿ ಕಾರ್ಯಕ್ರಮ ನಿರ್ವಹಣೆ ಮಾಡುತ್ತಾನೆ .

ಕಳೆದ ಕೆಲವು ವರ್ಷಗಳಿಂದ ಈ ಕಾರ್ಯಕ್ರಮದ ಸ್ವರೂಪ ಬಹಳಷ್ಟು ಬದಲಾಗಿದೆ (ಕೆಲವರು ಇದನ್ನು ಬೆಳೆದಿದೆ ಅಂತಲೂ ವ್ಯಾಖ್ಯಾನಿಸುತ್ತಾರೆ ಬಿಡಿ !) ಯಕ್ಷಗಾನಕ್ಕೆ ಪಿಟೀಲು ,ಕೊಳಲು , ತಬಲಾ , ಶಂಖ , ಸೆಕ್ಷಫೋನ್ ಇತ್ಯಾದಿ ಅಳವಡಿಸಿ ಅದೂ ಅಲ್ಲ ಇದೂ ಅಲ್ಲ ಎಂಬ ಯಾವುದೊ ಒಂದು ಮಿಶ್ರಣವನ್ನು ಮಾಡಿ ಹೊಸತನ ಎನ್ನಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದವರೂ ಇದ್ದಾರೆ . ಮೊದ ಮೊದಲು ಬೇರೆ ಬೇರೆ ಪ್ರಯೋಗಗಗಳನ್ನು ಯಕ್ಷಗಾನ ಸಂಗೀತ ವೈಭವ ಕಾರ್ಯಕ್ರಮ ನೆಪದಲ್ಲಿ ಮಾಡಿದ್ದು ಅವುಗಳು ಕೇವಲ ಮನೋರಂಜನಾ ದೃಷ್ಟಿಯಲ್ಲಿ ತೆಗೆದು ಅಸ್ವಾದಿಸ ಬೇಕಾದ್ದು ಎಂಬ ನೆಲೆಗೆ ಮಾತ್ರ ಸೀಮಿತವಾಗಿತ್ತು.

ಇತ್ತೀಚಿಗೆ ಯಕ್ಷಗಾನ ಸಂಗೀತ ವೈಭವ ಕಾರ್ಯಕ್ರಮಗಳಲ್ಲಿ ಈ ವಿಚಿತ್ರ ವಾದ್ಯಗಳ ಬಳಕೆ ಕಡಿಮೆಯಾಗತೊಡಗಿ ಕೇವಲ ಯಕ್ಷಗಾನೀಯ ಹಿಮ್ಮೆಳದಲ್ಲೇ ಪದ್ಯಗಳು ಜನರಂಜಿಸತೊಡಗಿದೆ . ವಿವಿಧ ಪ್ರಸಂಗಗಳಿಂದ , ವಿವಿಧ ರಾಗಗಳ , ವಿವಿಧ ರಸಭಾವವನ್ನು ಪ್ರಕಟಿಸಬಲ್ಲ ಹಾಡುಗಳನ್ನು ಆಯ್ದು ಸರಿ ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾರ್ಯಕ್ರಮ ಹೆಚ್ಚು ಜನಪ್ರಿಯವಾಗುತ್ತಿದೆ. ಇಡೀ ರಾತ್ರಿ ಕುಳಿತು ಆಟ ನೋಡಲು ಅಲ್ಲಿ ಬರುವ ವಿವಿಧ ಸನ್ನಿವೇಶಗಳ ವಿವಿಧ ಪದಗಳನ್ನು ಸವಿಯಲು ಅಸಾಧ್ಯವಾದ ಪ್ರೇಕ್ಷಕನಿಗೆ ಇದೊಂದು ಅನುಕೂಲಕರ ಹಾಗೂ ಆಹ್ಲಾದಕರ ಕಾರ್ಯಕ್ರಮವೆನಿಸುತ್ತದೆ.

ಇಲ್ಲಿ ಪರಂಪರೆಯ ಮಟ್ಟುಗಳು , ಹೊಸತನದ ಪೆಟ್ಟುಗಳು , ಆಶು ಸಾಹಿತ್ಯಗಳು ಮುಂತಾದ ವೈವಿಧ್ಯಮಯ ಹಾಡುಗಳು ಕೇಳಲು ಸಿಗುತ್ತವೆ .ಕಾರ್ಯಕ್ರಮದ ಸಂಘಟನಾ ದೃಷ್ಟಿಯಿಂದಲೂ ಇದೊಂದು ಸುಲಭದ ಹೆಚ್ಚು ಹೊರೆಯನ್ನು ನೀಡದ ಕಾರ್ಯಕ್ರಮ .ಎರಡು ಜನ ಭಾಗವತರು ಒಬ್ಬೊಬ್ಬ ಚೆಂಡೆ ಮದ್ದಲೆ ಸಹಕಲಾವಿದರು ಹೀಗೆ ನಾಲ್ಕು ಜನರಿದ್ದರೆ ಒಂದು ಸರಳ ಸುಂದರ ಕಾರ್ಯಕ್ರಮ ಸವಿಯಲು ಸಿಗುತ್ತದೆ !

ಮನೆಗಳಲ್ಲಿ , ಚಿಕ್ಕ-ಪುಟ್ಟ ಸಮಾರಂಭಗಳನ್ನು ನಡೆಸುವಾಗ ಇಂಥ ಕಾರ್ಯಕ್ರಮವನ್ನು ಆಯೋಜಿಸಲು ಹೆಚ್ಚು ಶ್ರಮವಿರುವುದಿಲ್ಲ . ಮಾತ್ರವಲ್ಲ ದೊಡ್ಡ ದೊಡ್ಡ ಕಲಾವಿದರಿಗೆ ಹೇಳಿ ಅವರು ಕೈ ಕೊಡುವ ಹಾಗೂ ಸಂಘಟಕನಿಗೆ ತಲೆಬಿಸಿಯಾಗಲು ಅವಕಾಶವೂ ಇಲ್ಲ ! ಇದರಿಂದ ಕಲಾವಿದರಿಗೆ ಪ್ರೋತ್ಸಾಹ ನೀಡಿದಂತೆಯೂ ಆಗುತ್ತದೆ. ಒಟ್ಟಿನಲ್ಲಿ ಮಳೆಗಾಲದಲ್ಲಿ ಹಾಗೂ ಸರಳ ಹಾಗೂ ಸಂಕ್ಷಿಪ್ತ ಕಾರ್ಯಕ್ರಮ ಮಾಡಲು ಯೋಚಿಸುವವರಿಗೆ ಇಂಥ "ಗಾನ-ವೈಭವ" ಅನುಕೂಲಕರವಾಗಿದೆ.

Thursday, June 17, 2010

ಛಪ್ಪನ್ನೈವತ್ತಾರು ದೇಶಗಳು


ಯಕ್ಷಗಾನದಲ್ಲಿ ಹಲವು ಪ್ರಸಂಗಗಳಲ್ಲಿ ದಿಗ್ವಿಜಯಕ್ಕೆ ಹೊರಟ ರಾಜರು ಸುತ್ತಿ ಗೆದ್ದು ಬರುವ ಯಾ ಹೆಸರಿಸುವ ಛಪ್ಪನ್ನೈವತ್ತಾರು ದೇಶಗಳು ಕೆಳಗಿನಂತಿವೆ


ಅಂಗ

ವಂಗ

ಕಳಿಂಗ

ಕರ್ಣಾಟ

ಕೇರಳ

ಕಾಮರೂಪ

ಗೌಡ

ವನವಾಸ (ಬನವಾಸಿ )

ಕುಂತಲ

ಕೊಂಕಣ

ಮಗಧ

ಸೌರಾಷ್ಟ್ರ

ಮಾಳವ

ಲಾಟ

ಭೋಜ

ವಿರಾಟ

ಶಬರ

ಕಕುರ

ಕುರು

ಅವಂತಿ

ಪಾಂಡ್ಯ

ಮದ್ರ

ಸಿಂಹಲ

ಗುರ್ಜರ

ಪಾರಸಿಕ

ಮಿಥಿಲ

ಪಾಂಚಾಲ

ಕ್ರೂರಸೇನಿ

ಗಾಂಧಾರ

ಬಾಹ್ಲಿಕ

ಹೈಹಯ

ತೌಳವ

ಸಾಲ್ವ

ಪುಂಡ್ರಕ

ಪ್ರಾಗ್ಜೋತಿಷ್ಯ

ಮತ್ಸ್ಯ

ಚೇದಿ

ಬರ್ಬರ

ನೇಪಾಳ

ಗೌಳ

ಕಾಶ್ಮೀರ

ಕನ್ಯಾಕುಬ್ಜ

ವಿದರ್ಭ

ಖುರಸಾಣ

ಮಹಾರಾಷ್ಟ್ರ

ಕೋಸಲ

ಕೇಕಯ

ಅಹಿಚ್ಛತ್ರ

ತ್ರಿಲಿಂಗ

ಪ್ರಯಾಗ

ಕರಹಂಟಕ

ಕಾಂಭೋಜ

ಭೋಟ

ಚೋಳ

ಹೂಣ

ಕಾಶಿ



ಎಲ್ಲ ನೆನಪಿಟ್ಟು ರಂಗಸ್ಥಳದಲ್ಲಿ ಹೇಳಲು ಕಷ್ಟ ಮಾರಾಯರೇ ಅಲ್ವಾ ?

Wednesday, June 2, 2010

ಯಕ್ಷಗಾನದಲ್ಲಿ ವಿದ್ವತ್












ಸರ್ಕಾರವು ಯಕ್ಷಗಾನದಲ್ಲಿ ವಿದ್ವತ್ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿರುವುದು ಸ್ವಾಗತಾರ್ಹ. ತಡವಾಗಿಯಾದರೂ ಎಚ್ಚೆತ್ತಿರುವ ಅಕಾಡೆಮಿಗಳು ಅವಸಾನದ ಅಂಚಿಗೆ ಸರಿಯುತ್ತಿರುವ ಯಕ್ಷಗಾನದಂಥ ಸಮರ್ಥ ಕಲಾಪ್ರಕಾರಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಉದ್ದೇಶಿಸಿರುವುದು ಯಕ್ಷ ಪ್ರಿಯರಿಗೆ ಸಂತಸ ಉಂಟುಮಾಡಿದೆ . ಇನ್ನು ಸರಿಯಾದ ಪ್ರಸಂಗ ಪ್ರಯೋಗ ಪುಸ್ತಕವನ್ನು ಹಾಗೂ ಅದಕ್ಕೆ ಸಂಬಂಧಿಸಿದ ಆಕರ ಗ್ರಂಥಗಳನ್ನು ಸೇರಿಸಿ ಅನುಭವಿಗಳ ಅಭಿಮತದೊಂದಿಗೆ ಪಾಠ ಪುಸ್ತಕವನ್ನು ಸಿದ್ದಗೊಳಿಸಿ ಆಸಕ್ತರಿಗೆ ಕಲಿಯಲು ವ್ಯವಸ್ಥಿತವಾದ ಅಸ್ತಿವಾರ ಒದಗಿಸಿದಲ್ಲಿ ಈ ಪ್ರಯತ್ನಗಳು ಸಫಲವಾಗಬಹುದು .

ಏನಿದ್ದರೂ ಒಳ್ಳೆಯ ಪ್ರಯತ್ನಕ್ಕೆ ಸರಕಾರವು ಹೊರಟಿರುವುದು ಎಲ್ಲರಿಗೂ ಹೆಮ್ಮೆಯ ವಿಷಯ .