ಒಬ್ಬ ರಚಿಸಿದ ಯಾವುದೇ ಕೃತಿಯನ್ನು ಯಥಾವತ್ ಯಾ ಅಲ್ಪ ಸ್ವಲ್ಪ ಬದಲಾವಣೆಗಳೊಂದಿಗೆ ಭಟ್ಟಿ ಇಳಿಸಿದರೆ ಅದನ್ನು ಕೃತಿ ಚೌರ್ಯ ಎನ್ನುತ್ತಾರೆ. ಕೆಲವರಂತೂ ಇತ್ತೀಚಿಗೆ ರಾಜಾರೋಷವಾಗಿ "ಇಂಥ ಕಡೆಯಿಂದ ಕದ್ದದ್ದು " ಎಂದು ತಮ್ಮ ಚೋರತನವನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡು ಹೆಸರುವಾಸಿಯಾಗ ಬಯಸಿದರೆ ಇನ್ನು ಕೆಲವರು ಕೇವಲ ಹಣ ಸಂಪಾದನೆಯೇ ಗುರಿಯಾಗಿಸಿ ಕೃತಿ ಚೌರ್ಯ ಮಾಡುವುದು ಕಂಡುಬರುತ್ತದೆ.ಕೃತಿ ಚೌರ್ಯ ಮಾಡುವುದು ಕಾನೂನು ರೀತ್ಯಾ ಅಪರಾಧ. ಇಂಥ ಕೆಟ್ಟ ಚಾಳಿಯೂ ನಿಜವಾದ ಕೃತಿಕಾರನಿಗೆ ಹಲವು ರೀತಿಯ ನಷ್ಟವನ್ನು ಉಂಟುಮಾಡುತ್ತದೆ .ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಕೃತಿ ಚೌರ್ಯ ಇಂದು ವ್ಯಾಪಕವಾಗಿರುವುದು ವಿಷಾದನೀಯ. ನಿಜವಾದ ಪ್ರತಿಭೆ ಇದ್ದಲ್ಲಿ ಇಂಥ ದುರ್ಧೆಸೆಗೆ ಯಾವೊಬ್ಬನೂ ಇಳಿಯುವುದು ಹಿತಕರವಲ್ಲ .
ಇಲ್ಲಿ ನಾನು ಹೇಳಹೊರಟಿರುವುದು ಕೃತಿ ಚೌರ್ಯದ ಒಂದು ರೂಪವಾದ ಧ್ವನಿಮುದ್ರಿಕೆಗಳ ಚೋರತನದ ಬಗ್ಗೆ !
ಇತ್ತೀಚಿಗೆ ಬೆಂಗಳೂರಿನ ಪ್ರಸಿದ್ಧ ಕಲಾಕ್ಷೇತ್ರದಲ್ಲಿ ಯಕ್ಷಗಾನ ವೀಕ್ಷಣೆಗೆ ಹೋಗಿದ್ದಾಗ ಧ್ವನಿಮುದ್ರಿಕೆಗಳ ತಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯಿಂದ ಅಪೂರ್ವವೆನಿಸಿದ ಕೆಲವು ಪ್ರಸಂಗಗಳ ತಟ್ಟೆಯೊಂದನ್ನು ಗಮನಿಸಿದಾಗ ಅದರಲ್ಲಿ ಮುದ್ರಿತವಾಗಿರುವಂತೆ "ಪಾಂಡವಸ್ವರ್ಗಾರೋಹಣ ", "ರಣಚಂಡಿ ", "ವಿಷಮ ದಾಂಪತ್ಯ " ಇತ್ಯಾದಿ ಎಂಟು ಪ್ರಸಂಗಗಳಿರುವ ಒಂದು ಅಪೂರ್ವ ಸಂಗ್ರಹವೆಂದೂ ಹಿಮ್ಮೇಳದಲ್ಲಿ ಬಡಗುತಿಟ್ಟಿನ ಭಾಗವತ ವಿದ್ವಾನ್ ಒಬ್ಬರು ಈ ಎಲ್ಲ ಪ್ರಸಂಗಗಳಲ್ಲೂ ಭಾಗವತರೆಂದೂ , ಮುಮ್ಮೆಳದಲ್ಲಿ ತೆಂಕು ತಿಟ್ಟಿನ ಪ್ರಸಿದ್ಧ ಅರ್ಥಧಾರಿಗಳಾದ ಶೇಣಿ, ಕುಂಬಳೆ, ನಯನ ಕುಮಾರ್,ಕೆ.ಗೋವಿಂದ ಭಟ್ ಎಂದೂ ಪಟ್ಟಿಯಲ್ಲಿ ಪ್ರಕಟಿಸಿದ್ದು ಸಹಜವಾಗಿ ಕುತೂಹಲ ಹುಟ್ಟಿಸುವ ವಿಚಾರವಾದುದರಿಂದ ಕೂಡಲೇ ಹಣ ತೆತ್ತು ಖರೀದಿಸಿದೆ .
ಮನೆಗೆ ಮರಳಿ ಹೊಸತಾಗಿ ಖರೀದಿಸಿದ ತಟ್ಟೆಯನ್ನು ಆಲಿಸಬೇಕೆಂದು ಆರಂಭಿಸಿದಾಗ ಮೊದಲಿಗೆ "ಇದನ್ನೆಲ್ಲಿಯೋ ಕೇಳಿದ್ದೆನಲ್ಲಾ? " ಎಂಬ ಗುಮಾನಿ ಹುಟ್ಟಿಕೊಂಡಿತು . ಪಾಂಡವ ಸ್ವರ್ಗಾರೋಹಣ ಪ್ರಸಂಗದಲ್ಲಿ ಶೇಣಿಯವರ ಧರ್ಮರಾಯ ಹಾಗೂ ನಯನ ಕುಮಾರರ ಕೃಷಿಕ ಸಿದ್ಧನ ಪಾತ್ರದ ಸಂಭಾಷಣೆ ಕೇಳುತ್ತಿದ್ದಂತೆ ನನ್ನ ಸಂದೇಹವೆಲ್ಲ ಮಾಯವಾಗಿ ಇದು ಅದುವೇ! ಎಂದು ಸ್ಪಷ್ಟವಾಯಿತು . ನಾನು ೨೦೦೧ ರಲ್ಲಿ ಸುಳ್ಯದ ಸಂಗೀತ ಕ್ಯಾಸೆಟ್ ಅಂಗಡಿಯಿಂದ ಖರೀದಿಸಿದ್ದ ಆಡಿಯೋ ಕ್ಯಾಸೆಟ್ "ಪಾಂಡವ ಸ್ವರ್ಗಾರೋಹಣ " ದಲ್ಲಿ ತೆಂಕು ತಿಟ್ಟಿನ ಪ್ರಖ್ಯಾತ ಮನೆತನದ ಭಾಗವತರೊಬ್ಬರು ಭಾಗವತಿಕೆಯನ್ನು ಮಾಡಿದ್ದು ಅದರ ಸವಿಯನ್ನು ತುಂಬಾ ಸಲ ಸವಿದ ಮೇಲೆ ಈ ತಟ್ಟೆಯಿಂದ ಹೊರ ಹೊಮ್ಮುವ ಅರ್ಥಕ್ಕೂ ಆ ಕ್ಯಾಸೆಟ್ ಅರ್ಥಕ್ಕೂ ಎಳ್ಳಷ್ಟು ವೆತ್ಯಾಸವಿಲ್ಲ ಕೇವಲ ಪದಗಳು ಮಾತ್ರ ಬಡಗಿನವು ಅಷ್ಟೇ ಎಂದು ತಿಳಿಯಿತು !
ಬಹಳ ಜಾಣತನದಿಂದ ತೆಂಕಿನ ಪದಗಳನ್ನು ಮಾತ್ರ ಕಿತ್ತು ಹಾಕಿ ಬಡಗಿನ ಪದ್ಯಗಳನ್ನು ಜೋಡಿಸಿ ಮಾರುಕಟ್ಟೆಯಲ್ಲಿ ಬಿಟ್ಟು ಲಾಭ ಪಡೆದ ಕೃತಿ ಚೋರರು ಮಾಡಿದ ಕಿತಾಪತಿ ಇದು ಎಂದು ತಿಳಿದಾಗ ಬಹಳ ವಿಷಾದವೆನಿಸಿತು.
ಇದೇಕೆ ಹೀಗೆ ?
ತೆಂಕು ತಿಟ್ಟಿನ ಪ್ರಖ್ಯಾತ ಮನೆತನದ ಭಾಗವತರ ಹಾಡು ಅಷ್ಟೊಂದು ಕಳಪೆಯೇ ? ಈಗಿನಂತೆ ಕೇಳಲು ಕರ್ಣ ಕರ್ಕಶವೇ ?
ಖಂಡಿತಾ ಇಲ್ಲ .
ಯಾಕೆಂದರೆ ತೆಂಕಿನ ಗಾನ ಗಂಧರ್ವರೆನಿಸಿದ್ದ ಭಾಗವತರು ತಮ್ಮ ವೃತ್ತಿ ಜೀವನದ ಉತ್ತುಂಗ ಸ್ಥಿತಿಯಲ್ಲಿ ಇದ್ದಾಗ ಹಾಡಿದ ಹಾಡು ಅದು. ಹಿರಿಯ ಕಲಾವಿದರೆಲ್ಲ ಒಂದೇ ಉಸಿರಿಗೆ ಸೂಚಿಸುತ್ತಿದ್ದ ಯುವ ಭಾಗವತರಾಗಿದ್ದ ಅವರ ಹಾಡು ಅತ್ಯಂತ ಮನೋಹರವಾಗಿ ಮೂಡಿ ಬಂದ ಕ್ಯಾಸೆಟ್ ಅದು. ಯಾವನೇ ಕಲಾ ರಸಿಕ ಈ ಭಾಗವತರ ವೃತ್ತಿ ಜೀವನದ ಉತ್ತುಂಗ ಸ್ಥಿತಿಯಲ್ಲಿ ಹಾಡಿದ ಕರ್ಣ ಪರ್ವ ಪ್ರಸಂಗದ " ಎಲೆ ಪಾರ್ಥ ನೀ ಕೇಳು ಒಲಿದೆನ್ನ ಮಾತಾ " ಅಥವಾ ಪಟ್ಟಾಭಿಷೇಕ ಪ್ರಸಂಗದ " ವೀರ ದಶರಥ ನೃಪತಿ ಇನ ಕುಲವಾರಿಧಿಗೆ ಚಂದ್ರಮನು ...." ಕೇಳಿದರೆ ಈಗಲೂ ಹುಚ್ಚೆದ್ದು ಕುಣಿಯಬಲ್ಲ ಅದ್ಭುತ ಪ್ರತಿಭೆ ಅದು !
ಹಾಗಿದ್ದರೆ ಬಡಗಿನ ಭಾಗವತರ ಹಾಡು ಅಷ್ಟೊಂದು ಸೊಗಸಾಗಿದೆಯೇ ?
ಖಂಡಿತಾ ಇಲ್ಲ !
ಅವರಂತೂ ಗಡಿಬಿಡಿಗೆ ಮಾಡಿದ ಅಡುಗೆಯಂತೆ ಪದ್ಯಗಳನ್ನು ಹೇಳಿ ಮುಗಿಸಿದ್ದಾರೆ !
ಇರಲಿ ಇದೊಂದಲ್ಲವೇ ಎಂದು ಮುಂದಿನ "ರಣಚಂಡಿ " ತಾಳಮದ್ದಲೆ ಕೇಳ ಹೊರಟರೆ ಮತ್ತದೇ ಕಲಬೆರಕೆ!
ಕ್ಯಾಸೆಟ್ ಕಲಬೆರಕೆ ಮಾಡುವ ಭರದಲ್ಲಿ ಮೂಲ ಭಾಗವತರು ಪಾತ್ರಧಾರಿಯ ಮಾತಿನ ನಡುವೆ ಹೂಂ ಗುಟ್ಟಿದ್ದನ್ನು ತೆಗೆಯಲು ಮರೆತಿದ್ದು ಕೇಳುಗರಿಗೆ ಇದು ಕಲಬೆರಕೆ ಎಂದು ಸ್ಪಷ್ಟವಾಗಿ ತಿಳಿಯಲು ಅನುಕೂಲವಾಗಿದೆ . ಒಟ್ಟಿನಲ್ಲಿ ಈ ಕಲಬೆರಕೆ ಕ್ಯಾಸೆಟ್ ಕೇಳುವಾಗ ಹೋಳುಗಳಿಲ್ಲದ ಸಾಂಬಾರನ್ನು ಸವಿದ ಅನುಭವ ಆಗುವುದಂತೂ ಖಚಿತ !
ಇಂಥ ಕ್ಯಾಸೆಟ್ ಚೌರ್ಯ ನಿಜಕ್ಕೂ ಖಂಡನೀಯ . ಇದರಿಂದ ನಿಜವಾದ ರಸಾಸ್ವಾದನೆ ಸಿಗದೇ ನಿರಾಶೆಯಾಗುವುದಂತೂ ಖಂಡಿತ .
ಕಲಾ ರಸಿಕರು ಇಂಥ ತಟ್ಟೆಗಳನ್ನು ಖರೀದಿಸುವ ಮೊದಲು ಸರಿಯಾಗಿ ಪರೀಕ್ಷಿಸಿ ತೆಗೆದುಕೊಳ್ಳುವುದು ಉತ್ತಮ .
ನಿಮಗಿಂಥಾ ಅನುಭವ ಆಗಿದೆಯೇ ?